ಶ್ರೀಕೃಷ್ಣರಾಜ ಪರಿಷನ್ಮಂದಿರ ಕಟ್ಟಡ ನಿರ್ಮಾಣಗೊಂಡು ಒಂಬತ್ತು ದಶಕಗಳೆ ಕಳೆದಿದ್ದು ಈ ಕಟ್ಟಡ ಪಾರಂಪರಿಕ ಕಟ್ಟಡಗಳ ಸಾಲಿಗೆ ಸೇರಲಿದೆ. ಪಾರ್ಲಿಮೆಂಟ್ ಸೆಂಟ್ರಲ್ ಹಾಲ್ನಷ್ಟೇ ಮಹತ್ವವನ್ನು ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ ಹೊಂದಿದೆ. ಇಂಥಹ ಐತಿಹಾಸಿಕ ಕಟ್ಟಡದ ನವೀನ ರೂಪವನ್ನು ೨೬ ಅಗಸ್ಟ್ ೨೦೨೨ರ ಶುಕ್ರವಾರ ಸಂಜೆ ೫ ಗಂಟೆಗೆ ನಾಡಿನ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಂದಾಯ ಸಚಿವರಾದ ಶ್ರೀ ಆರ್. ಅಶೋಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ವಿ ಸುನೀಲ್ ಕುಮಾರ್, ಪ್ರೌಢ ಶಿಕ್ಷಣ ಇಲಾಖೆ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಅವರು ಭಾಗವಹಿಸಲಿದ್ದಾರೆ. ವಿಶೇಷ ಅಥಿತಿಗಳಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ, ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರು ಭಾಗವಹಿಸಲಿದ್ದಾರೆ. ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜೇಂದ್ರ ಪರಿಷತ್ತಿನ ಮಂದಿರ ಹಾಗೂ ಆವರಣ ನವೀಕರಣ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕನ್ನಡಾಭಿಮಾನಿಗಳು, ಸಹೃದಯಿ ಕನ್ನಡಿಗರೆಲ್ಲರೂ ಭಾಗವಹಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಆದರದ ಆಮಂತ್ರಣ ನೀಡಿದ್ದಾರೆ.
Publisher: ಕಸಾಪ | ಕನ್ನಡ ಸಾಹಿತ್ಯ ಪರಿಷತ್ತು